ಮೂಡುಬಿದ್ರೆಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳದಿಂದ ಮನನೊಂದು ಬುಧವಾರದಂದು ನೇಣಿಗೆ ಶರಣಾಗಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಬೈಲೂರಿನವಳಾದ ಸಂಗೀತಾ ಮೂಡುಬಿದಿರೆಯ ಹೊರವಲಯದ ಹೌದಾಲ್ನಲ್ಲಿರುವ ತನ್ನ ಚಿಕ್ಕಮ್ಮನ ಮನೆಯಿಂದ ಕಾಲೇಜಿಗೆ ಹೋಗಿ ಬರುತ್ತಿದ್ದಳು. 17ರ ಹರೆಯದ ಈಕೆಯು ಮಂಗಳವಾರ ಕಾಲೇಜಿಗೆ ಹಾಜರಾಗಿದ್ದು, ವಿಪರೀತ ಕಿವಿನೋವು ಎಂದು, ಈ ಬಗ್ಗೆ ಆಕೆ ಕಾಲೇಜಿನಲ್ಲಿ ತಿಳಿಸಿ, ಕಾಲೇಜಿನಿಂದ ವಿದ್ಯಾರ್ಥಿನಿಯ ಪೋಷಕರಿಗೆ ಕರೆಮಾಡಿ ಆಕೆಯನ್ನು ಕರೆದುಕೊಂಡು ಹೋಗಲು ಸೂಚಿಸಿದ್ದರು.
ಆದರೆ ಆಕೆಯ ಪೋಷಕರು ಕೆಲಸದ ಒತ್ತಡದಲ್ಲಿದ್ದರಿಂದ ಆ ಕಾಲೇಜಿನ ನಿವೃತ್ತಿ ಹೊಂದಿದ ಕ್ಲಕ್೯ ಶ್ರೀಧರ್ ಪುರಾಣಿಕನಿಗೆ ಆಕೆಯನ್ನು ಕಾಲೇಜಿನಿಂದ ಕರೆತರುವಂತೆ ಹೇಳಿದ್ದಾರೆ. ಸಂತ್ರಸ್ಥೆಯ ಪೋಷಕರು ಆರೋಪಿಯ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿರುವ ಕಾರಣ ಪರಿಚಯಸ್ಥ ಎಂದು ಆಕೆಯನ್ನು ಪುರಾಣಿಕನ ಕಾರಿನಲ್ಲಿ ಮನೆಯತ್ತ ಕರೆದುಕೊಂಡು ಬರಲು ತಿಳಿಸಲಾಗಿದೆ. ಆಕೆಯನ್ನು ಮನೆಗೆ ಕರೆತರುವಾಗ ದಾರಿಯಲ್ಲಿ ಕಾರು ನಿಲ್ಲಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಇದರಿಂದ ಆಕೆ ಮನನೊಂದು ಬುಧವಾರ ತನ್ನ ವಾಸ್ತವ್ಯದ ಮನೆಯ ಸಮೀಪದ ಹಾಡಿಯ ಮರವೊಂದಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಆತ್ಮಹತ್ಯೆಗೂ ಮುನ್ನ ಪತ್ರವನ್ನು ಬರೆದಿಟ್ಟಿದ್ದಳು. ಆ ಡೆತ್ ನೋಟ್ನಲ್ಲಿ ಕಾಲೇಜಿನ ನಿವೃತ್ತ ಸಿಬ್ಬಂದಿಯ ಶ್ರೀಧರ ಪುರಾಣಿಕನ ಹೆಸರನ್ನು ಉಲ್ಲೇಖೀಸಿ, ಆತನ ಲೈಂಗಿಕ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದಾಳೆ.
ಈ ಹಿನ್ನೆಲೆಯಲ್ಲಿ ಆರೋಪಿ ಶ್ರೀಧರ ಪುರಾಣಿಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪಿಯುಸಿ ವಿಧ್ಯಾರ್ಥಿನಿ ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಕ್ಸೋ ಕಾಯಿದೆ, ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ದಂಡ ಸಂಹಿತೆಯ ಆಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಹಾಯಕ ಕಮಿಷನರ್ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
