Bengaluru: ಬೆಂಗಳೂರಿನಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಪಾರಿವಾಳಗಳನ್ನು ಪ್ರೀತಿಸುವವರಿಗೆ ಗ್ರೇಟರ್ ಬೆಂಗಳೂರು ಅಥಾರಿಟಿ ಮಹತ್ವದ ಹಾಗೂ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಈ ಆದೇಶ ಉಲ್ಲಂಘಿಸಿದರೆ ದಂಡದ ಜೊತೆಗೆ ಜೈಲು ಶಿಕ್ಷೆಯನ್ನೂ ವಿಧಿಸುವ ಸಾಧ್ಯತೆ ಇದೆ ಎಂದು ಪಾಲಿಕೆ ಎಚ್ಚರಿಕೆ ನೀಡಿದೆ.ಪಾರಿವಾಳಗಳಿಂದ ವಿವಿಧ ಕಾಯಿಲೆಗಳು ಮಾನವರಲ್ಲಿ ಹರಡುವ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾರಿವಾಳಗಳ ಮಲ, ರೆಕ್ಕೆಗಳು ಹಾಗೂ ಅವುಗಳ ವಾಸಸ್ಥಾನಗಳಿಂದ ಉಂಟಾಗುವ ಬ್ಯಾಕ್ಟೀರಿಯಾ ಮತ್ತು ಫಂಗಸ್ಗಳಿಂದ ಉಸಿರಾಟ ಸಂಬಂಧಿತ ಸಮಸ್ಯೆಗಳು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.
ಇನ್ಮೇಲೆ ರಸ್ತೆ, ಪಾರ್ಕ್ಗಳು, ಬಸ್ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳು, ಸರ್ಕಾರಿ ಕಟ್ಟಡಗಳು, ಅಪಾರ್ಟ್ಮೆಂಟ್ಗಳ ಸಾಮಾನ್ಯ ಪ್ರದೇಶಗಳು ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕಲು ಅವಕಾಶವಿಲ್ಲ.ಪಾಲಿಕೆ ಆದೇಶದಂತೆ, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುತ್ತಿರುವುದು ಕಂಡುಬಂದರೆ ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ದಂಡ ವಿಧಿಸುವ ಜೊತೆಗೆ, ನಿಯಮ ಉಲ್ಲಂಘನೆ ಗಂಭೀರವಾದಲ್ಲಿ ಜೈಲು ಶಿಕ್ಷೆಗೂ ಅವಕಾಶವಿದೆ ಎಂದು ಸ್ಪಷ್ಟಪಡಿಸಲಾಗಿದೆ. ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಸ್ಥಳಗಳಲ್ಲಿ ಆಹಾರ ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ನಿಗಧಿತ ಹಾಗೂ ನಿಯಂತ್ರಿತ ಸ್ಥಳಪಾರಿವಾಳ ಪ್ರಿಯರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಪಾರಿವಾಳಗಳಿಗೆ ಆಹಾರ ನೀಡಲು ನಿಗಧಿತ ಹಾಗೂ ನಿಯಂತ್ರಿತ ಸ್ಥಳಗಳನ್ನು ಗುರುತಿಸುವ ಪ್ರಕ್ರಿಯೆಯನ್ನೂ ಪಾಲಿಕೆ ಆರಂಭಿಸಿದೆ.
ಇನ್ಮೇಲೆ ಪಾಲಿಕೆ ಸೂಚಿಸುವ ನಿಗಧಿತ ಸ್ಥಳಗಳಲ್ಲಿ ಮಾತ್ರ ಪಾರಿವಾಳಗಳಿಗೆ ಆಹಾರ ನೀಡಬೇಕು. ನಿಗಧಿತ ಸ್ಥಳಗಳ ಹೊರತಾಗಿ ಆಹಾರ ನೀಡಿದರೆ ಕಾನೂನು ಕ್ರಮ ಅನಿವಾರ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ತೆಗೆದುಕೊಂಡ ಈ ಕ್ರಮಕ್ಕೆ ಕೆಲವರು ಬೆಂಬಲ ವ್ಯಕ್ತಪಡಿಸುತ್ತಿದ್ದರೆ, ಪಾರಿವಾಳ ಪ್ರಿಯರ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
