Nalin Kumar kateel : ಪ್ರತಿದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ್ಯ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ರೈಲ್ವೆ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲ್(Nalin Kumar kateel )ತಿಳಿಸಿದ್ದಾರೆ.
ರೈಲ್ವೆ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈಋುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಸಚಿವರು, ಈಗಾಗಲೇ ಈ ಕುರಿತು ಅಗತ್ಯ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬ ನಿವಾರಿಸುವ ಬಗ್ಗೆ ಗಮನ ಸೆಳೆದಾಗ ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಆರಂಭಿಸುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಹಾಗೂ ರೈಲ್ವೆ ಇಲಾಖೆಗೆ ಸಂಬಂಧಿಸಿದ ನಾನಾ ಬೇಡಿಕೆಗಳನ್ನು ಒದಗಿಸುವಂತೆ ಸೆ.22ರ ಶುಕ್ರವಾರ ಹೊಸದಿಲ್ಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ ಎಂದು ಸಂಸದರು ತಿಳಿಸಿದ್ದಾರೆ.
ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ವರೆಗೆ ವಿಸ್ತರಿಸಬೇಕೆಂಬ ಕೇರಳ ರಾಜ್ಯದ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಸಚಿವರನ್ನು ಒತ್ತಾಯಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ ಎಂದು ನಳಿನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೇರಳ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ಬಂದಿದೆ ಎಂದು ಅಪಪ್ರಚಾರ ,ಯುವಕನಿಂದ ಬೆಳ್ಳಾರೆ ಠಾಣೆಗೆ ದೂರು
