Yogi Government: ಕೆಲವು ದಿನಗಳ ಹಿಂದೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ನಡೆದ ಇಸ್ರೇಲ್ ವಿರೋಧಿ ಮೆರವಣಿಗೆಯ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ (Yogi Government) ಖಡಕ್ ಸೂಚನೆ ನೀಡಿದೆ. ಹೌದು, ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಭಾರತ ಸರ್ಕಾರದ ನಿಲುವನ್ನು ವಿರೋಧಿಸುವ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ಯಾಲೆಸ್ತೀನ್ಗೆ ಬೆಂಬಲ ವ್ಯಕ್ತಪಡಿಸುವ ಚಟುವಟಿಕೆಗಳಲ್ಲಿ ತೊಡಗಿರುವ ಪ್ರತಿಯೊಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರ ಪ್ರದೇಶ ಸರ್ಕಾರ ಎಚ್ಚರಿಕೆ ನೀಡಿದೆ.
ಫೆಲೆಸ್ತೀನ್ ಅನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಚಟುವಟಿಕೆಗಳು ಅಥವಾ ಪೋಸ್ಟ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೊಲೀಸರಿಗೆ ಆದೇಶ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಅಹಿತಕರ ಭಾವನೆ ಪ್ರಚೋದಿಸುವ ಯಾವುದೇ ಪ್ರಯತ್ನವನ್ನು ಅಥವಾ ಧಾರ್ಮಿಕ ಸ್ಥಳಗಳಿಂದ ಅಂತಹುದೇ ಕರೆಯನ್ನು ಸಹಿಸಲಾಗುವುದಿಲ್ಲ ಎಂದು ಮುಸ್ಲಿಂ ಧರ್ಮಗುರುಗಳೊಂದಿಗೆ ಚರ್ಚಿಸಲು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಹಮಾಸ್ ಭಯೋತ್ಪಾದಕರು ಇಸ್ರೇಲ್ ಮೇಲೆ ದಾಳಿ ಮಾಡಿ ನೂರಾರು ಜನರನ್ನು ಕೊಂದ ನಂತರ ಗಾಜಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿಯನ್ನು ಖಂಡಿಸಿ ನೂರಾರು ವಿದ್ಯಾರ್ಥಿಗಳು ಕೆಲವು ದಿನಗಳ ಹಿಂದೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ‘ಪ್ಯಾಲೆಸ್ತೀನ್ ಪರ’ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯನ್ನು ಕೈಗೊಂಡಿದ್ದರು.
ಸದ್ಯ ಈಗಾಗಲೇ ಯುಪಿಯ ಬರೇಲಿ ಜಿಲ್ಲೆಯಲ್ಲಿ ಗಾಜಾದ ಮೇಲೆ ವೈಮಾನಿಕ ಬಾಂಬ್ ದಾಳಿಯ ಚಿತ್ರಗಳನ್ನು ಪೋಸ್ಟ್ ಮಾಡಿದ ಅಪರಿಚಿತ ಯುವಕನ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ ಎನ್ನಲಾಗಿದೆ.
