Bengaluru: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲೂ ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧ ಹೊರಡಿಸಿರುವ ನೋಟಿಸ್ ಹಿಂಪಡೆಯಲಾಗುವುದು ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಮಾತ್ರವಲ್ಲದೇ ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್ ನೀಡಲಾಗುವುದು ಎಂದು ಸರಕಾರದ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿರುವ ಕುರಿತು ವರದಿಯಾಗಿದೆ.
ದೇವಾಲಯದ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ಮತ್ತು ಪ್ರಾಣಿ ಬಲಿ ನಡೆಸುವಂತಿಲ್ಲ ಎಂಬ ಷರತ್ತು ವಿಧಿಸಿ ಬಡವನಹಳ್ಳಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು 2014ರ ಜುಲೈ 13ರಂದು ಸ್ಥಳೀಯ ಪೊಲೀಸರ ಹೊರಡಿಸಿದ್ದ ನೋಟಿಸ್ ಪ್ರಶ್ನಿಸಿ ಹೊನ್ನೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.
ಇದನ್ನೂ ಓದಿ:Satish Sail: ಅಕ್ರಮ ಹಣ ವರ್ಗಾವಣೆ ಆರೋಪ: ಶಾಸಕ ಸತೀಶ್ ಸೈಲ್ 2 ದಿನ ಇ.ಡಿ. ಕಸ್ಟಡಿಗೆ
ಪ್ರಾಣಿಬಲಿಗೆ ಸಂಬಂಧಿಸಿದಂತೆ ಮಾತ್ರ ನಿರ್ಬಂಧ ವಿಧಿಸಲಾಗಿದೆ. ಆದರೆ ಮಾಂಸಾಹಾರ ಸೇವನೆ ಸಂಬಂಧ ಯಾವುದೇ ನಿರ್ಬಂಧವಿಲ್ಲ ಎಂದು ಹೊಸ ನೋಟಿಸ್ ನೀಡುವುದಾಗಿ ನ್ಯಾಯಪೀಠಕ್ಕೆ ವಿವರಣೆ ನೀಡಿದರು.
