Polling booth: ದಕ್ಷಿಣ ಕನ್ನಡ: ರಾಜ್ಯಾದ್ಯಂತ ನಾಳೆ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಚುನಾವಣೆಯ ಪೂರ್ವಭಾವಿಯಾಗಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಪ್ರಚಾರ ಪೂರ್ಣಗೊಳಿಸಿದ್ದು, ನಾಳೆ ನಡೆಯುವ ಮತದಾನದ ಸಂದರ್ಭ ಪಾಲಿಸಬೇಕಾದ ಕೆಲವೊಂದು ನಿಯಮಗಳನ್ನು ಜಿಲ್ಲಾಧಿಕಾರಿ ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರವಿಕುಮಾರ್,ಮತದಾನ ಕೇಂದ್ರಕ್ಕೆ ಮತದಾರರನ್ನು ಕರೆತರಲು ಅಭ್ಯರ್ಥಿ ಅಥವಾ ಯಾವುದೇ ರಾಜಕೀಯ ಪಕ್ಷದ ಪದಾಧಿಕಾರಿಗಳಿಗೆ ಅವಕಾಶವಿಲ್ಲ ಎಂದರು. ಅಲ್ಲದೇ ಮತದಾನ ನಡೆಯುವ ಕೇಂದ್ರದೊಳಗೆ (Polling booth) ಮೊಬೈಲ್ ಸಂಪೂರ್ಣ ನಿಷೇಧಿಸಲಾಗಿದ್ದು,ನಿಯಮ ಉಲ್ಲಂಘನೆಯಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸ್ಪಷ್ಟಪಡಿಸಿದರು.
ಮತದಾನ ಕೇಂದ್ರದಲ್ಲಿ ಓರ್ವ ಅಧಿಕಾರಿಯನ್ನು ಹೊರತು ಪಡಿಸಿ ಉಳಿದ ಸಿಬ್ಬಂದಿಗಳು ಕೂಡಾ ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು,ಮತದಾರರು ಕೂಡಾ ಮೊಬೈಲ್, ಲ್ಯಾಪ್ ಟಾಪ್ ಸಹಿತ ಇನ್ನಿತರ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಸಲಾಗಿದೆ. ಈ ಬಗ್ಗೆ ಯಾವುದೇ ರೀತಿಯ ದೂರುಗಳು ಬಂದಲ್ಲಿ ಕೂಡಲೇ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
ಅಲ್ಲದೇ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಜಿಲ್ಲೆಯಲ್ಲಿ ವಿವಿಧ ಫೋರ್ಸ್ ಸಹಿತ ಪೊಲೀಸರು ರಾತ್ರಿ ಹಗಲೆನ್ನದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲವೂ ಕ್ರಮ ಬದ್ಧವಾಗಿ ನಡೆಸುತ್ತಿದ್ದು,ಸಾರ್ವಜನಿಕರು ತೊಂದರೆ ಅನುಭವಿಸದಂತೆ ಬೇಕಾದ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದರು.
