Karnataka election result: ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka election result) ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭ್ಯವಾಗುವ ಸಾಧ್ಯತೆ ಇಲ್ಲ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ಸ್ಥಿತಿ ಎಂಬ ವರದಿಯ ಬೆನ್ನಲ್ಲೇ, ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಜೆಡಿಎಸ್ ಜತೆ ಸಂಪರ್ಕದಲ್ಲಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಪಕ್ಷ ಪ್ರಕಟಿಸಿದೆ.
ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ಹೇಳಿವೆ.
ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ಪೂರ್ಣವಾಗುತ್ತಿದ್ದಂತೇ ಕುಮಾರಸ್ವಾಮಿ ಬುಧವಾರ ರಾತ್ರಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. “ಯಾವ ಪಕ್ಷ ಬೆಂಬಲಿಸಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಸೂಕ್ತ ಸಮಯದಲ್ಲಿ ಅದನ್ನು ಬಹಿರಂಗಪಡಿಸಲಾಗುತ್ತದೆ’ ಎಂದು ಪಕ್ಷದ ಮುಖಂಡ ತನ್ವಿ ಅಹ್ಮದ್ ಎನ್ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ.
ಆದರೆ ಈ ಪ್ರತಿಪಾದನೆಯನ್ನು ಬಿಜೆಪಿ ಸಾರಸಗಟಾಗಿ ಅಲ್ಲಗಳೆದಿದ್ದು,ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಮೈತ್ರಿ ಸರಕಾರದ ಪ್ರಶ್ನೆಯೇ ಇಲ್ಲ. ಬಿಜೆಪಿ, ಜೆಡಿಎಸ್ ಪಕ್ಷವನ್ನು ಸಂಪರ್ಕಿಸಿಯೇ ಇಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಮತ್ತೊಂದು ಸಂದರ್ಶನದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಭಾರೀ ಮಳೆ ಹಿನ್ನೆಲೆ : ಮತ್ತೆ ಜೀವಂತಿಕೆ ಪಡೆದ ನೇತ್ರಾವತಿ
