Aravind Limbavali: ಕಾಂಗ್ರೆಸ್ ಸರ್ಕಾರದ ಮುಡಾ ಹಗರಣದ(Muda Scam) ವಿರುದ್ಧ ಬಿಜೆಪಿ-ಜೆಡಿಎಸ್(BJP-JDS) ಮೈಸೂರು ಪಾದಯಾತ್ರೆ ಮುಗಿಯುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ವಿರುದ್ಧ ಹತ್ತುಕ್ಕೂ ಹೆಚ್ಚು ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಜಾಂಬೋಟಿ ರಸ್ತೆಯಲ್ಲಿರುವ ರೆಸಾರ್ಟ್ ನಲ್ಲಿ ಬಿಜೆಪಿ ರೆಬಲ್ ನಾಯಕರು ಸಭೆ ನಡೆಸಿದ್ದು, ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತ ಎನ್.ಆರ್.ಸಂತೋಷ್ ಕೂಡ ಭಾಗಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. ಈ ಬೆನ್ನಲ್ಲೇ ತಾವು ಗೌಪ್ಯ ಸಭೆ ನಡೆಸಿದ್ದೇಕೆ ಎಂದು ಅರವಿಂದ ಲಿಂಬಾವಳಿ(Aravind Limbavali) ಅವರು ಶಾಕಿಂಗ್ ಕಾರಣ ಬಿಚ್ಚಿಟ್ಟಿದ್ದಾರೆ.
ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ ಸಿಡಿದೆದ್ದಿದ್ದಾರೆ. ಈ ಇಬ್ಬರು ನಾಯಕರಿಗೆ ಇನ್ನೂ ಹಲವು ಬಿಜೆಪಿ ನಾಯಕರು ಸಾಥ್ ನೀಡಿದ್ದು, ರೆಬಲ್ ನಾಯಕರ ರಹಸ್ಯ ಸಭೆಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಪ್ರತಾಪ್ ಸಿಂಹ, ಅಣ್ಣಾಸಾಹೇಬ ಜೊಲ್ಲೆ, ಜಿ.ಎಂ.ಸಿದ್ದೇಶ್ವರ್, ಕುಮಾರ್ ಬಂಗಾರಪ್ಪ ಸೇರಿದಂತೆ ಹತ್ತಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಭೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಅರವಿಂದ್ ಲಿಂಬಾವಳಿ, ನಮ್ಮದು ಬಂಡಾಯ ಸಭೆಯಲ್ಲ, ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ನಡೆಸುವ ಸಭೆ ಎಂದು ಶಾಕ್ ನೀಡಿದ್ದಾರೆ.
ಹೌದು, ಈ ಬಗ್ಗೆ ಪ್ರತಿಕ್ರಿಯಿಸಿದ ಅರವಿಂದ ಲಿಂಬಾವಳಿ ಅವರು ಈಗಾಗಲೇ ಮುಡಾ ಹಗರಣದ ವಿಚಾರವಾಗಿ ಸರ್ಕಾರದ ವಿರುದ್ಧ ಪಾದಯಾತ್ರೆ ನಡೆಸಲಾಗಿದೆ. ಅದೇ ರೀತಿ ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರದ ವಿಚಾರವಾಗಿಯೂ ಪಾದಯಾತ್ರೆ ನಡೆಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದ್ದು, ಈ ಬಗ್ಗೆ ಹೈಕಮಾಂಡ್ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೆ ಮಾಧ್ಯಮಗಳಲ್ಲಿ ಬಂಡಾಯದ ಸಭೆ ಎಂದು ವರದಿಯಾಗುತ್ತಿದೆ. ನಾವು ಪಕ್ಷದ ವಿರುದ್ಧ ಬಂಡಾಯವೆದ್ದಿಲ್ಲ. ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಹಾಗಾಗಿ ಪಕ್ಷದ ಬಲವರ್ಧನೆಗೆ ಸಭೆ ನಡೆಸಿ ಚರ್ಚಿಸಿದ್ದೇವೆ. ಪಕ್ಷದಲ್ಲಿನ ಲೋಪದೋಷ ಸರಿಪಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ ಎಂದಿದ್ದಾರೆ.
