Jai Shri Ram: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪ್ರದೇಶದಲ್ಲಿ ಮಸೀದಿಯೊಂದರ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹೌದು, ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಭಾವನೆಗೆ ಧಕ್ಕೆಯಾಗುವುದು ಹೇಗೆ ಎಂದು ಪ್ರಶ್ನಿಸಿರುವ ಕೋರ್ಟ್, ಕೆಳ ಹಂತದ ನ್ಯಾಯಾಲದಯ ವಿಚಾರಣೆ ರದ್ದುಗೊಳಿಸಿ ತೀರ್ಪು ನೀಡಿದೆ.
ಮೊಕದ್ದಮೆಯ ವಿಚಾರಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ, ‘ಜೈ ಶ್ರೀರಾಮ್’ ಎಂದು ಕೂಗುವುದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ, ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ಅಲ್ಲದೆ, ಪ್ರಕರಣ ಸಂಬಂಧ ಪುತ್ತೂರಿನ ಎರಡನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಿದೆ. ವಿಚಾರಣೆಗೆ ಅನುಮತಿ ನೀಡಿದರೆ ಅದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದೂ ಅಭಿಪ್ರಾಯಪಟ್ಟಿದೆ.
ಸದ್ಯ ಎಂಎಸ್ ಧೋನಿ ವರ್ಸಸ್ ಯರ್ರಗುಂಟ್ಲಾ ಶ್ಯಾಮಸುಂದರ್ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಹೈಕೋರ್ಟ್, ಶಾಂತಿ ಸ್ಥಾಪನೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಯಾವುದೇ ಪರಿಣಾಮ ಬೀರದ ಕೃತ್ಯಗಳು ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದು ಹೇಳಿದೆ.
ದಾಖಲಾದ ದೂರಿನ ಪ್ರಕಾರ, 2023 ರ ಸೆಪ್ಟೆಂಬರ್ 24 ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ-ಮರ್ದಾಳ ರಸ್ತೆಯಲ್ಲಿರುವ ಮಸೀದಿ ಆವರಣಕ್ಕೆ ನುಗ್ಗಿದ್ದ ಕೆಲವು ಅಪರಿಚಿತ ವ್ಯಕ್ತಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗಿದ್ದರು ಎಂದು ಆರೋಪ ಮಾಡಲಾಗಿತ್ತು.
ಇನ್ನು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿರುವ ಈ ವ್ಯಕ್ತಿಗಳು ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ನಂತರ, ದಕ್ಷಿಣ ಕನ್ನಡದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನಿವಾಸಿ ಕೀರ್ತನ್ ಕುಮಾರ್ ಮತ್ತು ಎನ್ಎಂ ಸಚಿನ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 447, 295 ಎ 505 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಜೈ ಶ್ರೀರಾಮ ಘೋಷಣೆ ಪ್ರಕರಣದ ಆರೋಪಿಗಳು ಹೈಕೋರ್ಟ್ಗೆ ಮೊರೆ ಹೋಗಿದ್ದರು. ತಮ್ಮ ವಿರುದ್ಧದ ಆರೋಪಗಳಿಗೆ ಅಗತ್ಯವಾದ ಯಾವುದೇ ಅಂಶಗಳು ಪ್ರಕರಣದಲ್ಲಿ ಇಲ್ಲ ಎಂದು ಅವರು ಪ್ರತಿಪಾದಿಸಿದ್ದರು.
