Krishnabaire Gowda: ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆಗಳು ಇನ್ನೂ ನಿಧನ ಹೊಂದಿದವರ ಹೆಸರಿನಲ್ಲೇ ಇರುವ ಕಾರಣ, ಪೌತಿ ಖಾತೆ ಅಭಿಯಾನದ ಮೂಲಕ ವಾರಸುದಾರರ ಹೆಸರಿಗೆ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಕಂದಾಯ ಇಲಾಖೆ ಮುಂದಾಗಿದ್ದು, ಮಂಗಳವಾರ ನಗರದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಮೃತರ ಹೆಸರಿನಲ್ಲಿ ಉಳಿದಿರುವ ಜಮೀನಿನ ದಾಖಲೆಗಳನ್ನು ವಾರಸುದಾರರಿಗೆ ವರ್ಗಾವಣೆ ಮಾಡುವ ಸಲುವಾಗಿ ಮನೆ ಬಾಗಿಲಿಗೆ ಪೌತಿ ಖಾತೆ ತಲುಪಿಸುವ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.
ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಆಸ್ತಿಯನ್ನು ತಮ್ಮ ವಾರಸುದಾರರ ಅಥವಾ ಕುಟುಂಬಸ್ಥರ ಯಾವುದೇ ವ್ಯಕ್ತಿಯ ಹೆಸರಿಗೆ ಜಮೀನಿನ ಖಾತೆಯನ್ನು ವರ್ಗಾವಣೆ ಮಾಡುವುದನ್ನು ಪೌತಿ ಖಾತೆ ಎನ್ನಲಾಗುವುದು. ಸದ್ಯ ಮನೆ ಬಾಗಿಲಿಗೆ ಹೋಗಿ ಪೌತಿ ಖಾತೆ ಅಭಿಯಾನ ನಡೆಸಿದ್ದಲ್ಲಿ ಅರ್ಹರಿಗೆ ಸುಲಭವಾಗಿ ಪೌತಿ ಖಾತೆ ಲಭ್ಯವಾಗುತ್ತದೆ. ಜಮೀನಿನ ವಾರಸುದಾರಿಕೆಯ ಪಹಣಿ ಸಿಗುತ್ತದೆ ಎಂದು ಕೃಷ್ಣಬೈರೇಗೌಡ (Krishnabaire Gowda) ತಿಳಿಸಿದರು.
ಮುಖ್ಯವಾಗಿ ವಾರಸುದಾರರಿಗೆ ವರ್ಗಾವಣೆ ಜಮೀನು ಮಾಡಿಕೊಡಲು ಈ ಯೋಜನೆ ರೂಪಿಸಲಾಗಿದೆ. ಸದ್ಯ ಯಾವ ಜಿಲ್ಲೆಯಲ್ಲಿ ಕೆಲಸದ ಒತ್ತಡ ಕಡಿಮೆ ಇದೆಯೋ ಅಂತಹ ಜಿಲ್ಲೆಗಳಲ್ಲಿ ಮೊದಲು ಈ ಅಭಿಯಾನ ಕೈಗೆತ್ತಿಕೊಳ್ಳಲಾಗುತ್ತದೆ. ನಂತರ ಬೇರೆ ಬೇರೆ ಜಿಲ್ಲೆಗಳಿಗೆ ಇದನ್ನು ವಿಸ್ತರಿಸಲು ಇಲಾಖೆ ಯೋಜನೆ ಹಾಕಿಕೊಂಡಿದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.
