Dharmasthala: ಸೌಜನ್ಯ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹಾಗೂ ತಪ್ಪಿತಸ್ಥರ ಶಿಕ್ಷೆಗೆ ಆಗ್ರಹಿಸಿ ಧರ್ಮಸ್ಥಳ ಚಲೊ ನಡೆಸಬೇಕು ಎಂಬ ನಿರ್ಣಯವನ್ನು ಸಮಾನ ಮನಸ್ಕರ ಸಭೆ ಕೈಗೊಂಡಿದೆ.
ಈ ಪ್ರಕರಣದಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಮಾ. 18 ರಂದು ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಚಿಂತಕರು, ರಂಗಕರ್ಮಿಗಳು ಹಾಗೂ ಹೋರಾಟಗಾರರು ಭಾಗವಹಿಸಿದ್ದರು.
ಪ್ರಕರಣದ ಬಗ್ಗೆ ಚರ್ಚಿಸಿದ ಅವರು, ‘ಪಾದಯಾತ್ರೆ ಅಥವಾ ಬೈಕ್ ರ್ಯಾಲಿ ನಡೆಸಬೇಕು. ಧರ್ಮಸ್ಥಳದಲ್ಲಿ (Dharmasthala) ಬೃಹತ್ ಸಮಾವೇಶವನ್ನೂ ಆಯೋಜಿಸಬೇಕು. ಅದಕ್ಕೂ ಮೊದಲು ಜಿಲ್ಲಾ ಮಟ್ಟದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಬೇಕು’ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಅಂತಿಮವಾಗಿ, ‘ಧರ್ಮಸ್ಥಳ ಚಲೊ ಹೆಸರಿನಲ್ಲಿ ಒಂದು ಜಾಥಾವನ್ನು ನಡೆಸಬೇಕು. ಅದರ ಸ್ವರೂಪ ಯಾವ ರೀತಿ ಇರಬೇಕು? ಎಲ್ಲಿಂದ ಪ್ರಾರಂಭಿಸಬೇಕು? ಜಿಲ್ಲೆಗಳಲ್ಲಿ ಯಾವ ರೀತಿ ಸಭೆ ನಡೆಸಬೇಕು ? ಸಮಾವೇಶವನ್ನು ಎಲ್ಲಿ ಮಾಡಬೇಕು ಸೇರಿ ವಿವಿಧ ಸಂಗತಿಗಳ ಬಗ್ಗೆ ಚರ್ಚಿಸಿ, ರೂಪುರೇಷೆ ಸಿದ್ಧಪಡಿಸಲು ವಿವಿಧ ಸಂಘಟನೆಗಳ ಮುಖ್ಯಸ್ಥರ ಜತೆಗೆ ಇನ್ನೊಂದು ಸಭೆ ನಡೆಸಬೇಕು’ ಎಂದು ಈ ಸಭೆಯಲ್ಲಿ ನಿರ್ಧರಿಸಲಾಯಿತು.
