6
Mangaluru: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ, ಕೋಮುದ್ವೇಷ ಹರಡುವ ಮತ್ತು ಪ್ರಚೋದನಕಾರಿ ವೀಡಿಯೋ, ಫೊಟೋ ಪೋಸ್ಟ್ಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಪೋಸ್ಟ್ಗಳು ಹರಿದಾಡುತ್ತಿದ್ದು, ಇವುಗಳ ಮೇಲೆ ನಿಗಾ ಇಡಲು ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ತಂಡವನ್ನು ರಚನೆ ಮಾಡಲಾಗಿದೆ ಎಂದು ಅವರು ಹೇಳಿರುವ ಕುರಿತು ವರದಿಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಯಾರೂ ಕೂಡಾ ʼವಾರಿಯರ್ʼ ಆಗಲು ಯತ್ನ ಮಾಡಬಾರದು. ವಾಟ್ಸಪ್ ಸ್ಟೇಟಸ್, ಇನ್ಸ್ಟಾಗ್ರಾಂನಲ್ಲಿ ಅಥವಾ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷದ ಪೋಸ್ಟನ್ನು ಹಂಚಿಕೊಳ್ಳಬಾರದು. ಒಮ್ಮೆ ಕೇಸು ದಾಖಲಾದರೆ, ಆರೋಪಿಗಳು ಹಲವು ಕಾನೂನು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವಿಶೇಷವಾಗಿ ಯುವ ಜನತೆ ಈ ವಿಷಯದಲ್ಲಿ ಎಚ್ಚರದಿಂದ ಇರಬೇಕು ಎಂದು ಎಸ್ಪಿ ಹೇಳಿದರು.
