Kogilu Layout : ಕೋಗಿಲು ಲೇಔಟ್ ತೆರವು ಪ್ರಕರಣ ಕರ್ನಾಟಕ ಮತ್ತು ಕೇರಳ ಸರ್ಕಾರದ ಮಧ್ಯೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕೇರಳ ಸಿಎಂ ಪಿಣರಾಯಿ ಕರ್ನಾಟಕ ಸರ್ಕಾರವನ್ನು ಬುಲ್ಡೋಜರ್ ಸರ್ಕಾರ ಎಂದಿದ್ದರು. ಕೇರಳ ಸಿಎಂ ಪಿಣರಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರವು ಕೋಗಿಲು ಸಂತ್ರಸ್ತರಿಗೆ ಬೇರೆಡೆ ಮನೆ ವ್ಯವಸ್ಥೆಯನ್ನು ಮಾಡಿಕೊಡುವುದಾಗಿ ಭರವಸೆ ಕೊಟ್ಟಿತ್ತು. ಆದರೆ ಈ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು 2016ರಲ್ಲಿ ಈ ಪ್ರದೇಶದಲ್ಲಿ ಯಾವುದೇ ಮನೆಗಳೆ ಇರಲಿಲ್ಲ ಎಂಬುದು ಸಾಬೀತಾಗಿದೆ.
ಹೌದು, ಯಲಹಂಕದ ಕೋಗಿಲು ಬಡಾವಣೆಯಲ್ಲಿ ಮನೆಗಳ ಧ್ವಂಸ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಳೆದಗ 25 ವರ್ಷಗಳಿಂದ ವಾಸವಿದ್ದೇವೆಂಬ ಸ್ಥಳೀಯರ ಆರೋಪಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಯಾಟಲೈಟ್ ಫೋಟೋ ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡಿದೆ. ಈ ಸ್ಯಾಟಲೈಟ್ ಫೋಟೋಗಳು 2016ರ ಮೊದಲು ಆ ಪ್ರದೇಶದಲ್ಲಿ ಯಾವುದೇ ಮನೆಗಳೂ ಇರಲಿಲ್ಲವೆಂಬುದನ್ನು ಸ್ಪಷ್ಟಪಡಿಸಿವೆ.
ಫಕೀರ್ ಸಮುದಾಯವನ್ನು ಪ್ರತಿನಿಧಿಸುವ ಸೈಯದ್ ಖಾದರ್ ಬಾಷಾ ಅನ್ನೋರು, ಈ ಸ್ಥಳದಲ್ಲಿ 70 ಮನೆಗಳಿದ್ದು, ಹೆಚ್ಚಿನ ಮನೆಗಳು ಮುಸ್ಲಿಂ ಸಮುದಾಯದವರಿಗೆ ಸೇರಿದ್ದರೆ, ದಲಿತರು ಮತ್ತು ಕ್ರಿಶ್ಚಿಯನ್ನರು ಕೂಡ ಕಳೆದ 30 ವರ್ಷಗಳಿಂದ ವಾಸಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಜಿಬಿಎ ಹೇಳುತ್ತಿರೋದೇ ಬೇರೆ. ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಮಾನವೀಯತೆ ದೃಷ್ಟಿಯಿಂದ ಒತ್ತುವರಿದಾರರಿಗೆ ಸೂಕ್ತ ವಸತಿ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ರು. ಆದ್ರೆ ಅಕ್ರಮವಾಗಿ ವಾಸ ಮಾಡುತ್ತಿದ್ದಾರೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೇಳಿದೆ. ಆದ್ದರಿಂದ ಇಡೀ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಂತಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಾಲು ಸಾಲು ಸಾಕ್ಷ್ಯಗಳನ್ನು ಕೊಟ್ಟಿದ್ದರೂ ಕೂಡಾ, ವಾಸಿಮ್ ಎಂಬ ವ್ಯಕ್ತಿ ಒಂದೂವರೆ ಲಕ್ಷದಿಂದ ಎರಡು ಲಕ್ಷ ರೂಪಾಯಿ ನೀಡಿ ಮನೆ ನಿರ್ಮಿಸಿಕೊಂಡಿರುವುದಾಗಿ ಹೇಳಿದ್ದಾನೆ. ಈ ವಿಚಾರ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿದಾಗ ಚರ್ಚೆಯೂ ಆಯ್ತು. ಆದರೆ, ಡಿಸಿಎಂ ಮಾತ್ರ ಪ್ರತ್ಯೇಕ ವಸತಿ ನೀಡುವ ಭರವಸೆ ನೀಡಿದ್ದಾರೆ.
ಘಟನೆ ಬಳಿಕ ರಾಜೀವ್ ಗಾಂಧಿ ವಸತಿ ನಿಗಮದ (RGHC) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ನಿವಾಸಿಗಳು ವಸತಿಗಾಗಿ ಆಶಿಸುತ್ತಿದ್ದಾರೆಂದು ತಿಳಿಸಿದ್ದಾರೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ರಾಜೀವ್ ಗಾಂಧಿ ವಸತಿ ನಿಗಮದ ಹಿರಿಯ ಅಧಿಕಾರಿಯೊಬ್ಬರು, ಸರ್ಕಾರವು ರಾಜೀವ್ ಗಾಂಧಿ ವಸತಿ ನಿಗಮ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಕಂದಾಯ ಇಲಾಖೆಗೆ ಸಮೀಕ್ಷೆ ನಡೆಸಲು ನಿರ್ದೇಶನ ನೀಡಿದೆ.
