
Siddaramaiah: ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಪೊಲೀಸರೇ ಅಪರಾಧಗಳಲ್ಲಿ ಶಾಮೀಲಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸೈಬರ್ ಅಪರಾಧ ಮತ್ತು ಡ್ರಗ್ಸ್ ದಂಧೆಯನ್ನು ಮಟ್ಟಹಾಕಿ ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಸೂಚಿಸಿದರು.

ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ.
ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು. ಪೋಲೀಸ್ ಸಬ್ ಇನ್ಸ್ಪೆಕ್ಟರ್, ಎ ಎಸ್ ಪಿ, ಡಿ ವೈ ಎಸ್ ಪಿ , ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.
ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.
ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿ ಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು.
ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿ ವೈ ಎಸ್ ಪಿ ಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು.
ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ. ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.
