ಮಂಗಳೂರು: ಖ್ಯಾತ ಶಿಕ್ಷಣ ತಜ್ಞ, ಉದ್ಯಮಿ ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎನ್.ವಿನಯ ಹೆಗಡೆ (86) ಅವರು ಗುರುವಾರ ಬೆಳಗಿನ ಜಾವ ನಿಧನ ಹೊಂದಿದರು.
ಇವರ ತಂದೆ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಮೂರ್ತಿ ಹಾಗೂ ಲೋಕಸಭೆಯ ಮಾಜಿ ಸ್ಪೀಕರ್ ದಿ.ಜಸ್ಟಿಸ್ ಕೆ.ಎಸ್.ಹೆಗ್ಡೆ ಅವರ ದ್ವಿತೀಯ ಪುತ್ರ. ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ವಿನಯ ಹೆಗಡೆ ಅವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಮಾಡಿದ್ದರು. 1979 ರಲ್ಲಿ ತಮ್ಮ ತಂದೆಯವರ ಆಸೆಯಂತೆ ʼನಿಟ್ಟೆ ಎಜುಕೇಶನ್ ಟ್ರಸ್ಟ್ʼ ಸ್ಥಾಪನೆ ಮಾಡಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಯು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿ 40 ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳನ್ನು ಒಳಗೊಂಡಿದೆ. ಈ ವಿಶ್ವವಿದ್ಯಾಲಯಕ್ಕೆ ಪರಿಗಣಿತ ವಿವಿ ಮಾನ್ಯತೆಯೂ ಇತ್ತೀಚೆಗೆ ದೊರಕಿತ್ತು.
ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೇ, ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆಯ ಕಂಪನಿ ʼಲೆಮಿನಾ ಸಸ್ಪೆನ್ಷನ್ ಪ್ರೈವೇಟ್ ಲಿಮಿಟೆಡ್ ಸೇರಿ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿ ಯಶಸ್ವಿ ಉದ್ಯಮಿ ಪಟ್ಟ ಪಡೆದುಕೊಂಡಿದ್ದರು.
ಇವರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರವು ʼರಾಜ್ಯೋತ್ಸವ ಪ್ರಶಸ್ತಿʼ ನೀಡಿ ಗೌರವಿಸಿತ್ತು. ಮಂಗಳೂರು ವಿಶ್ವವಿದ್ಯಾಲಯವು ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿತ್ತು.
ಮೃತರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ಈ ರೀತಿ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3 ಗಂಟೆ: ಶಿವಭಾಗ್ನಲ್ಲಿರುವ ಅವರ ನಿವಾಸದಲ್ಲಿ. ಸಂಜೆ 4.30 ರಿಂದ 6 ಗಂಟೆಯವರೆಗೆ: ದೇರಳಕಟ್ಟೆಯ ನಿಟ್ಟೆ ಕ್ಯಾಂಪಸ್ನಲ್ಲಿ
