Udupi: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ ಭಕ್ತರೋರ್ವರು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ‘ಹೊನ್ನಿನ ಭಗವದ್ಗೀತಾ ಹೊತ್ತಗೆ’ ಜ.8 ರಂದು ಸಂಜೆ 5 ಗಂಟೆಗೆ ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಭಗವದ್ಗೀತೆಯ 18ಅಧ್ಯಾಯಗಳ 7೦೦ ಶ್ಲೋಕಗಳನ್ನು ಚಿನ್ನದ ಹಾಳೆ (ತಗಡು)ಯಲ್ಲಿ ಅಂದವಾಗಿ ಮುದ್ರಿಸಲಾಗಿದೆ. ಹೊನ್ನಿನ ಭಗವದ್ಗೀತಾ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತಂದು, ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಪರ್ಯಾಯ ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
