Dr G Parameshwar: ಧರ್ಮಸ್ಥಳ “ಸಾಮೂಹಿಕ ಸಮಾಧಿ” ಪ್ರಕರಣದ ಸಾಕ್ಷಿ ದೂರುದಾರನ ಆರೋಪಗಳು ಸುಳ್ಳು ಎಂದು ವಿಶೇಷ ತನಿಖಾ ತಂಡಕ್ಕೆ ಕಂಡುಬಂದರೆ ಆತನ ವಿರುದ್ಧ ಕಾನೂನಿನಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ.
ಹೌದು, ಧರ್ಮಸ್ಥಳ ಗ್ರಾಮದಲ್ಲಿ ಅಪರಿಚಿತ ಶವಗಳ ಹುಡುಕಾಟದ ಎಸ್ಐಟಿ ತನಿಖೆ ಕುರಿತು ಬಿಜೆಪಿ ಶಾಸಕರ ಆರೋಪಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳದ ಮಂಜುನಾಥ ದೇವಸ್ಥಾನದ ಆಡಳಿತ ಮಂಡಳಿ ಮೇಲೆ ಪದೇ ಪದೆ ಕೇಳಿಬರುತ್ತಿರುವ ಆಪಾದನೆಗಳ ಸತ್ಯಾಸತ್ಯತೆ ಹೊರತರಲು ಎಸ್ಐಟಿ ತನಿಖೆ ನಡೆಸಲಾಗುತ್ತಿದೆಯೇ ಹೊರತು ಇದರ ಹಿಂದೆ ಸರ್ಕಾರಕ್ಕೆ ಬೇರೆ ಯಾವುದೇ ಉದ್ದೇಶವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜೊತೆಗೆ ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ಮೇಲೆ ಪದೇ ಪದೆ ಎದುರಾಗುತ್ತಿದ್ದ ಆರೋಪಗಳ ಸತ್ಯಾಸತ್ಯತೆ ಅರಿಯಲು, ಇನ್ನು ಮುಂದೆ ಆರೋಪಗಳು ಬಾರದಂತೆ ನೋಡಿಕೊಳ್ಳಲು ಎಸ್ಐಟಿ ತನಿಖೆ ಮಾಡಲಾಗುತ್ತಿದೆ ಎಂದರು.ಅನಾಮಿಕ ದೂರುದಾರ ಹೇಳಿದ್ದೆಲ್ಲವನ್ನೂ ಎಸ್ಐಟಿ ಕೇಳುತ್ತಿಲ್ಲ. ಸತ್ಯಾಸತ್ಯತೆ ಪರಿಶೀಲಿಸಿ ಮುಂದುವರೆಯುತ್ತಿದೆ. ಇನ್ನು, ಅನಾಮಿಕ ಹೇಳಿರುವುದು ಸುಳ್ಳು ಎಂದು ಸಾಬೀತಾದರೆ ಕಾನೂನು ಪ್ರಕಾರ ಶಿಕ್ಷೆ ವಿಧಿಸಲಾಗುತ್ತದೆ. ಜತೆಗೆ, ಕುತಂತ್ರ ನಡೆದಿದ್ದರೂ ಅದರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
