Kadaba: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ ಚಿರತೆಯೊಂದು ಸಾಕು ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿದೆ.
ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ ಹೊತ್ತಿಗೆ ಮನೆಯಂಗಳದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಮನೆಯ ಸುತ್ತಮುತ್ತಲೇ ಹೊಂಚು ಹಾಕಿದ ಚಿರತೆ, ಅಂತಿಮವಾಗಿ ಸಾಕು ನಾಯಿಯನ್ನು ಕಚ್ಚಿಕೊಂಡು ಪರಾರಿಯಾಗಿದೆ. ಈ ದೃಶ್ಯಗಳು ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಕಳೆದ ಕೆಲ ದಿನಗಳಿಂದ ಈ ಪರಿಸರದಲ್ಲಿ ಸುಮಾರು ನಾಲ್ಕು ಮನೆಗಳ ಸಾಕು ನಾಯಿಗಳು ನಿಗೂಢವಾಗಿ ನಾಪತ್ತೆಯಾಗಿದ್ದವು. ಆದರೆ ಆ ಮನೆಗಳಲ್ಲಿ ಸಿಸಿಟಿವಿ ಇಲ್ಲದ ಕಾರಣ ಚಿರತೆಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ. ಇದೀಗ ಸುಮ ನೂಜಿಲ ಅವರ ಮನೆಯ ದೃಶ್ಯಾವಳಿಗಳಿಂದಾಗಿ, ಈ ಭಾಗದಲ್ಲಿ ಚಿರತೆ ಬೀಡು ಬಿಟ್ಟಿರುವುದು ಖಚಿತವಾಗಿದೆ.
