Old Pension: ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವುದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿಯ ನಂತರ ಯಾವುದೇ ರೀತಿಯ ಆರ್ಥಿಕ ಸೌಲಭ್ಯ ದೊರೆಯದೆ ನಿವೃತ್ತಿ ಜೀವನ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಹಳೆಪಿಂಚಣಿ ಮರು ಜಾರಿ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾ ನಾಯಕ ಎನ್.ಎಸ್. ಬೋಸರಾಜ್ ಅವರು ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ( Pension) ಯೋಜನೆ ಜಾರಿಯಲ್ಲಿದೆ. ಇದನ್ನು ರದ್ದುಪಡಿಸುವ ಸಂಬಂಧ ಹಳೇ ಪಿಂಚಣಿ (Old pension) ಯೋಜನೆ ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಯೋಜನೆ ಅನುಷ್ಠಾನದ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ ಎಂದರು.
ಕೇಂದ್ರ ಸರ್ಕಾರ 2004ರ ಜನವರಿ 1 ರಿಂದ ಎನ್.ಪಿ.ಎಸ್. ಜಾರಿಗೊಳಿಸಿದೆ. ರಾಜ್ಯದಲ್ಲಿ 2006ರ ಏಪ್ರಿಲ್ 1 ರಂದು ಮತ್ತು ನಂತರ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಎನ್.ಪಿ.ಎಸ್. ಜಾರಿಯಾಗಿದೆ. ಎನ್.ಪಿ.ಎಸ್. ರದ್ದುಗೊಳಿಸಿ ಓಪಿಎಸ್ ಮರು ಜಾರಿ ಸಂಬಂಧ ಸರ್ಕಾರ ರಚಿಸಿರುವ ಸಮಿತಿ ಅಧ್ಯಯನ ವರದಿ ನೀಡಲಿದೆ, ಆದರೆ ವರದಿಯ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
