Home » ಸೆಪ್ಟೆಂಬರ್ 27ರಂದು ಕೇಂದ್ರ ಸರಕಾರದ ಕೃಷಿ ನೀತಿಗಳನ್ನು ವಿರೋಧಿಸಿ ಭಾರತ ಬಂದ್ | ಹಲವು ಸಂಘಸಂಸ್ಥೆಗಳಿಂದ ಬೆಂಬಲ

ಸೆಪ್ಟೆಂಬರ್ 27ರಂದು ಕೇಂದ್ರ ಸರಕಾರದ ಕೃಷಿ ನೀತಿಗಳನ್ನು ವಿರೋಧಿಸಿ ಭಾರತ ಬಂದ್ | ಹಲವು ಸಂಘಸಂಸ್ಥೆಗಳಿಂದ ಬೆಂಬಲ

0 comments

ಕೇಂದ್ರ ಸರ್ಕಾರದ ಕೃಷಿ ನೀತಿಗಳನ್ನು ವಿರೋಧಿಸಿ ರಾಷ್ಟ್ರೀಯ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೆ.27 ರಂದು ಭಾರತ ಬಂದ್‌ಗೆ ಕರೆ ನೀಡಿದೆ.

ಇದಕ್ಕೆ ರಾಜ್ಯದಲ್ಲಿಯೂ ಕೆಲ ರೈತ ಪರ ಮತ್ತು ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳು, ನೌಕರರ ಒಕ್ಕೂಟಗಳು ಬೆಂಬಲ ವ್ಯಕ್ತಪಡಿಸಿದ್ದು, ವಾರದ ಆರಂಭದ ದಿನ ಬಸ್‌, ಆಟೋ, ಕ್ಯಾಬ್ ಮತ್ತು ಅಗತ್ಯ ವಸ್ತುಗಳ ಸೇವೆಯಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸ ಆಗುವ ಸಾಧ್ಯತೆ ಇದೆ.

ದೇಶದಾದ್ಯಂತ ಪ್ರಮುಖ 500 ಕ್ಕೂ ಹೆಚ್ಚು ರೈತಪರ ಸಂಘಟನೆಗಳು ಪ್ರತಿಭಟನೆ, ಧರಣಿ, ಮೆರವಣಿಗೆ ನಡೆಸಲಿವೆ. ಬೆಂಗಳೂರು ಮತ್ತು ರಾಜ್ಯದ ಇತರೆ ಪ್ರಮುಖ ಜಿಲ್ಲೆಗಳಲ್ಲಿಯೂ ಸಂಘಟನೆಗಳು ಮೆರವಣಿಗೆ ಹಮ್ಮಿಕೊಂಡಿದ್ದು, ಸಹಜವಾಗಿ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.

ಈ ಸಂಬಂಧ ಈಗಾಗಲೇ ಸಂಘಟನೆಗಳು ಸಭೆಗಳನ್ನು ನಡೆಸಿ ಭಾರತ ಬಂದ್ ದಿನದ ಪ್ರತಿಭಟನೆ ಯಾವ ಸ್ವರೂಪದಲ್ಲಿ ಇರಬೇಕು ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಿವೆ. ಅಲ್ಲದೆ, ಬ್ಯಾಂಕ್ ನೌಕರರು, ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರ ಸಂಘಟನೆಗಳ ನೆರವನ್ನೂ ಕೋರಿದ್ದು, ಇದರಿಂದ ಜನಸಾಮಾನ್ಯರಿಗೆ ಪ್ರತಿಭಟನೆಯ ಉದ್ದೇಶ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ.

ರೈತರ ಉತ್ಪಾದನೆ, ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ ಒಪ್ಪಂದ) ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಯ ವಿರುದ್ಧ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿಯೂ ಸಹ ಕರೋನಾ ಮಧ್ಯೆಯೇ ಭಾರತ ಬಂದ್‌ ನಡೆಸಿ ದೇಶದಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು. ತದನಂತರ ಕಳೆದ ಮಾರ್ಚ್‌ 26ರಂದು ಸಹ ಭಾರತ ಬಂದ್‌ಗೆ ಕರೆ ನೀಡಲಾಗಿತ್ತು. ಈಗ ಮತ್ತೊಮ್ಮೆ ಭಾರತ ಬಂದ್ ಕರೆ ನೀಡುವ ಮೂಲಕ ಹೋರಾಟದ ಬಿಸಿಯನ್ನು ಕಾಪಾಡುವ ಪ್ರಯತ್ನ ಮುಂದುವರಿಸಲಾಗುತ್ತಿದೆ.

You may also like

Leave a Comment