Udupi: 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ (Raghupathi Bhat) ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಅತುಲ್ ರಾವ್ಗೆ 1 ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ಸಿಜೆಎಂ ಜಿಲ್ಲಾ ನ್ಯಾಯಾಲಯ (Udupi CJM Court) ಶುಕ್ರವಾರ ಆದೇಶ ಹೊರಡಿಸಿದೆ.
ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ (Raghupathi Bhat) ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಮತ್ತು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿದ್ದ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್ಗೆ 1 ವರ್ಷ ಜೈಲು (Jail) ಶಿಕ್ಷೆಯೊಂದಿಗೆ ದಂಡ ವಿಧಿಸಿದೆ.
ಈ ಬಗ್ಗೆ ರಘುಪತಿ ಭಟ್ 2008ರ ಜೂ.19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲಿಗೆ, ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಓಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಸಿಓಡಿ ಪೊಲೀಸರು 2008ರ ಆ.22ರಂದು ಪ್ರಾಥಮಿಕ ಮತ್ತು 2009ರ ಜು.29ರಂದು ಅಂತಿಮ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಠಿ, ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರು ಪಡಿಸಿ ದುರುಪಯೋಗ ಪಡಿಸಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು.
ಉಡುಪಿ ರಘುಪತಿ ಭಟ್ ಅವರು ನೀಡಿದ ದೂರಿನಲ್ಲಿ ಪತ್ನಿ ಪದ್ಮಪ್ರಿಯಾ ಅವರ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರ ಸಿಗದ ಹಿನ್ನೆಲೆಯಲ್ಲಿ ಸಿಓಡಿ ಅಧಿಕಾರಿಗಳ ತನಿಖೆ ಅರ್ಧಕ್ಕೆ ಕೈ ಚೆಲ್ಲಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್ ಅವರು ಆರೋಪಿ ಮೇಲಿನ ಆರೋಪಗಳು ಬಹಿರಂಗವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ , ಐಪಿಸಿ 468 ಕಾಯಿದೆಯಡಿ 1 ವರ್ಷ ಜೈಲುಶಿಕ್ಷೆ ಮತ್ತು 5,000ರೂ. ದಂಡ ವಿಧಿಸಿದೆ. ಐಪಿಸಿ 417, 465, 471 ಕಾಯ್ದೆಯಡಿ ತಲಾ 6 ತಿಂಗಳು ಸಜೆ ಹಾಗೂ 5,000ರೂ. ದಂಡ ವಿಧಿಸಿದೆ.
15 ವರ್ಷಗಳ ಹಿಂದೆ ನಡೆದಿದ್ದೇನು?
2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ಅವರು ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತನಾದ ಅತುಲ್ ರಾವ್, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದುಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇರಿಸಿ ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ನಾಟಕ ಮಾಡಿದ್ದ ಎನ್ನಲಾಗಿದೆ.ಕಾರನ್ನು ಅಲ್ಲೇ ಬಿಟ್ಟ ಆರೋಪಿ ಅತುಲ್ ತನ್ನ ಕಾರಿನಲ್ಲಿ ಪದ್ಮಪ್ರಿಯ ಅವರನ್ನು ಕುಮಟಾದವರೆಗೆ ಕರೆದೊಯ್ದಿದ್ದ ಎನ್ನಲಾಗಿದೆ. ಕುಮಟಾಕ್ಕೆ ಬೆಂಗಳೂರಿನ ಚಾಲಕನೊಬ್ಬನನ್ನು ಕರೆಸಿಕೊಂಡು, ತನ್ನ ಕಾರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದ. ಈ ನಡುವೆ, ಪದ್ಮಪ್ರಿಯ ಅವರನ್ನು ಅತುಲ್ ರಾವ್ ಬಾಡಿಗೆ ಕಾರಿನಲ್ಲಿ ಕುಮಟಾದಿಂದ ಗೋವಾ ವಿಮಾನ ನಿಲ್ದಾಣಕ್ಕೆ ಕರೆದೊಯ್ದಿದ್ದ. ಇದಲ್ಲದೆ, ಅತುಲ್ ತನ್ನ ಪತ್ನಿ ಮೀರಾ ಅವರ ಡ್ರೈವಿಂಗ್ ಲೈಸನ್ಸ್ಗೆ ಪದ್ಮಪ್ರಿಯ ಅವರ ಫೋಟೋ ಅಂಟಿಸಿ, ಮೀರಾ ಹೆಸರಿನಲ್ಲಿ ಪದ್ಮಪ್ರಿಯ ಅವರನ್ನು ಗೋವಾ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಕರೆದುಕೊಂಡು ಹೋಗಿದ್ದನಂತೆ.
ಮೊದಲೇ ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಅತುಲ್ ರಾವ್, ದೆಹಲಿಗೆ ತೆರಳುವ ಮುನ್ನವೇ ಅಲ್ಲಿ ಮನೆ ಬಾಡಿಗೆ ಪಡೆದುಕೊಂಡಿದ್ದ. ಅದಕ್ಕೆ ಬೆಂಗಳೂರಿನ ನಕಲಿ ವಿಳಾಸ ನೀಡಿ ಬಾಡಿಗೆ ಕರಾರು ಪತ್ರ ಕೂಡ ನೀಡಿದ್ದ ಎನ್ನಲಾಗಿದೆ. ಆ ಬಾಡಿಗೆ ಕರಾರು ಪತ್ರದ ಮೂಲಕ ಅತುಲ್ ರಾವ್ ಅಲ್ಲಿ ಬ್ಯಾಂಕ್ ಖಾತೆ ಕೂಡ ತೆರೆದಿದ್ದ.ಅತುಲ್ ರಾವ್ ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕ್ಲರ್ಕ್ ಆಗಿದ್ದ. ಆದರೆ, ಬಿಇ ಮತ್ತು ಇಂಟಲ್ ಕಂಪೆನಿಯಲ್ಲಿ ಇಂಜಿನಿಯರ್ ಎಂಬುದಾಗಿ ಸುಳ್ಳು ಮಾಹಿತಿ ನೀಡಿದ್ದ ಎಂದು ದೂರಲಾಗಿದೆ.
ಇದನ್ನು ಓದಿ: Daily horoscope: ಕೈಗೆತ್ತಿಕೊಂಡ ಕೆಲಸ ಸಕಾಲದಲ್ಲಿ ಪೂರ್ಣ,ದೂರದ ಸಂಬಂಧಿಕರಿಂದ ನಿರೀಕ್ಷಿತ ಆರ್ಥಿಕ ಸಹಾಯ ಲಭ್ಯ!!!
