Padubidri: ಹಣದ ವ್ಯವಹಾರವೊಂದಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಕೂಡಿಹಾಕಿ ಮರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಒಂದು ಬೆಳಕಿಗೆ ಬಂದಿದೆ.
ಹೌದು, ಪಡುಬಿದ್ರಿ(Padubidri) ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಅವರನ್ನು ಬಲತ್ಕಾರವಾಗಿ ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಲಾಗಿದೆ. ಸಸಿಹಿತ್ಲು ಶ್ರೀಭಗವತಿ ಯಕ್ಣಗಾನ ಮೇಳದ ಕಲಾವಿದರಾಗಿರುವ ಇವರು, ಅವರ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್ನಿಂದ ಬಡ್ಡಿಗೆ ಸಾಲ ಪಡೆದುಕೊಂಡಿದ್ದರು. ಈ ಸಚಿನ್ ಅವರೇ ಇವರ ಮೇಲೆ ಹಲ್ಲೆ ಮಾಡಿದ್ದಾರೆ.
ಅಂದ ಹಾಗೆ ಸಚಿನ್ ನಿಂದ ಸಾಲ ಪಡೆದಿದ್ದ ನಿತಿನ್ ಆಚಾರ್ಯ ಅವರು ಅಸಲು ಬಡ್ಡಿಯನ್ನು ಕಟ್ಟುತ್ತಿದ್ದರು. ಆದ್ರೆ ನಿಗದಿತ ಸಮಯದೊಳಗೆ ಸಾಲವನ್ನು ಕಟ್ಟುತ್ತಿಲ್ಲ ಎಂಬ ಕಾರಣದಿಂದ ಸಚಿನ್, ಆತನ ಉದ್ಯಾವರದಲ್ಲಿರುವ ಮನೆಗೆ ಕರೆದುಕೊಂಡು ಹೋಗಿ, ಅಲ್ಲಿ ಮನೆಯಲ್ಲಿ ಬಲಾತ್ಕಾರವಾಗಿ ಕೂಡಿ ಹಾಕಿದ್ದಾರೆ. ಅಲ್ಲಿ ಸಚಿನ್, ಆತನ ತಂದೆ ಕುಶಾಲ್ ಹಾಗೂ ಇನ್ನೊರ್ವ ಅಪರಿಚಿತ ವ್ಯಕ್ತಿ ಕೋಣಗಳಿಗೆ ಹೊಡೆಯುವ ಬೆತ್ತದಿಂದ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದುದಲ್ಲದೆ ಕೆನ್ನೆಗೆ ಹೊಡೆದು ಖಾಲಿ ಬಾಂಡ್ ಪೆಪರ್ಗೆ ಬಲಾತ್ಕಾರವಾಗಿ ಸಹಿ ಪಡೆದುಕೊಂಡಿದ್ದಾರೆ ಎಂದು ದೂರಲಾಗಿದೆ.
ಇನ್ನು ಹಲ್ಲೆಗೊಳಗಾದ ನಿತಿನ್ ಅದೇ ರಾತ್ರಿ ಪುತ್ತೂರಿನಲ್ಲಿ ನಡೆದ ಯಕ್ಷಗಾನದಲ್ಲಿ ಪಾಲ್ಗೊಂಡಿದ್ದು, ಬೆಳಿಗ್ಗೆ ನೋವು ಜಾಸ್ತಿಯಾದ್ದರಿಂದ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
