Yuva nidhi-Annabhagya scheme: ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳ ಪೈಕಿ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹಾಗೆಯೇ, ಅನ್ನಭಾಗ್ಯ( Yuva nidhi-Annabhagya scheme) ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿಯನ್ನು ವಿತರಿಸಲು ಶನಿವಾರ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಕೌಶಲಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳು ಎರಡೂ ಯೋಜನೆಗಳ ಅನುಷ್ಠಾನಕ್ಕೆ ಪ್ರತ್ಯೇಕ ಆದೇಶ ಹೊರಡಿಸಿವೆ. ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು 2023ರಲ್ಲಿ ಪೂರೈಸುವವರಿಗೆ ಯುವ ನಿಧಿ ಯೋಜನೆಯಡಿ ಕ್ರಮವಾಗಿ ತಿಂಗಳಿಗೆ ರೂಪಾಯಿ 3,000 ಹಾಗೂ ರೂಪಾಯಿ 1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
ಯುವ ನಿಧಿ ಮಾರ್ಗಸೂಚಿಗಳು:
* ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಯಾವುದೇ ಕೆಲಸ ದೊರಕದ ಕನ್ನಡಿಗರು ಮಾತ್ರ ಯುವ ನಿಧಿ ಯೋಜನೆಗೆ ಅರ್ಹರು.
* ಒಟ್ಟು ಎರಡು ವರ್ಷಗಳವರೆಗೆ ಈ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಲು ಶಕ್ತರು
* ಒಂದುವೇಳೆ 2 ವರ್ಷದೊಳಗೆ ಉದ್ಯೋಗ ಸಿಕ್ಕರೆ ಭತ್ಯೆ ಪಾವತಿ ಸ್ಥಗಿತಗೊಳಿಸಲಾಗುವುದು
* ಉದ್ಯೋಗ ದೊರಕಿದ ಬಗ್ಗೆ ಸುಳ್ಳು ಅಥವಾ ತಪ್ಪು ಮಾಹಿತಿ ನೀಡಿದರೆ ಅಥವಾ ಉದ್ಯೋಗ ಸಿಕ್ಕಿದೆ ಎಂದು ಘೋಷಣೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ
* ನಿರುದ್ಯೋಗ ಭತ್ಯೆಯನ್ನು ನೇರ ನಗದು ಪಾವತಿ ವ್ಯವಸ್ಥೆ ಮೂಲಕ ಪಾವತಿ ಮಾಡಲಾಗುತ್ತದೆ
* ಸೇವಾ ಸಿಂಧು ಪೋರ್ಟಲ್ ಮೂಲಕ ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬೇಕು
ಯಾರಿಗೆ ಭತ್ಯೆ ಇಲ್ಲ?:
* ಪದವಿ ಅಥವಾ ಡಿಪ್ಲೋಮಾ ಬಳಿಕ ಉನ್ನತ ವ್ಯಾಸಂಗ ಮುಂದುವರಿಸಿದರೆ ಅಂಥವರಿಗೆ ಈ ಭತ್ಯೆ ಇಲ್ಲ
* ಅಪ್ರೆಂಟಿಸ್ ವೇತನ ಪಡೆಯುತ್ತಿರುವ ಯುವಕರಿಗೆ ಈ ಭತ್ಯೆ ಇಲ್ಲ
* ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೆ ಕೂಡಾ ಈ ಭತ್ಯೆ ಇಲ್ಲ
* ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಹಾಗೂ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಮಾಡುತ್ತಿರುವವರಿಗೂ ಯುವ ನಿಧಿ ಯೋಜನೆಯಡಿ ಭತ್ಯೆ ಸಿಗುವುದಿಲ್ಲ
ಅನ್ನಭಾಗ್ಯ ಯೋಜನೆಗೆ ಮಾರ್ಗಸೂಚಿಗಳು:
* ಈಗ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ಕೇಂದ್ರ ಸರ್ಕಾರ ತಿಂಗಳಿಗೆ 35 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ನೀಡುತ್ತಿದೆ.
* ಇನ್ನು ಮುಂದೆ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಮೂವರು ಸದಸ್ಯರಿದ್ದರೆ ತಿಂಗಳಿಗೆ 35 ಕೆಜಿ ಆಹಾರ ಧಾನ್ಯ ಫ್ರೀ ದೊರೆಯಲಿದೆ.
* ಈ ಕುಟುಂಬಗಳಲ್ಲಿ 4 ಜನರಿದ್ದರೆ ತಲಾ 10 ಕೆಜಿ ಅಕ್ಕಿಯಂತೆ ಒಟ್ಟು 40 ಕೆಜಿ, 5 ಇದ್ದರೆ 50 ಕೆಜಿ, ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಹಾಗಾಗಿ, ಪ್ರತಿ ವ್ಯಕ್ತಿಗೆ 10 ಕೆಜಿಯಂತೆ ಉಚಿತ ಆಹಾರ ಧಾನ್ಯ ಸಿಗಲಿದೆ.
* ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಲ್ಲಿ ಪ್ರತಿ ಸದಸ್ಯರಿಗೆ 10 ಕೆ.ಜಿ.ಯಂತೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ.
* ಕೇಂದ್ರ ಸರ್ಕಾರವು ಆಹಾರ ಭದ್ರತಾ ಕಾಯ್ದೆಯಡಿ ಈಗಾಗಲೇ ಅಂತ್ಯೋದಯ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ತಲಾ 35 ಕೆ.ಜಿ. ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ 5 ಕೆ.ಜಿ. ಆಹಾರ ಧಾನ್ಯವನ್ನು ಒದಗಿಸುತ್ತಿದೆ. ಈಗಿನ ಹೆಚ್ಚುವರಿ ಆಹಾರ ಧಾನ್ಯದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಲಭಿಸಲಿದೆ!
