Ashakirana scheme: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ತಮ್ಮ 14ನೇ ಬಜೆಟ್ ಮಂಡಿಸಿದ್ದು, 2023-24ನೇ ಸಾಲಿನ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಅವರು ನಮ್ಮೆನ್ನೆಲ್ಲ ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಪ್ಪು ಸ್ಮರಣಾರ್ಥ ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಘೋಷಿಸಿದ್ದಾರೆ.
ಕರ್ನಾಟಕ ರತ್ನ ಡಾ|| ಪುನೀತ್ ರಾಜ್ಕುಮಾರ್ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಎಲ್ಲಾ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಠಾತ್ ಹೃದಯಾಘಾತ ತಪ್ಪಿಸಲು ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ ಏಕಬಳಕೆಯ ಡಯಾಲೈಸರ್ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಣೆ ಮತ್ತು ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ಹೆಚ್ಚಳ, ಒಟ್ಟು 92 ಕೋಟಿ ರೂ. ಮೀಸಲು ಇರಿಸಲಾಗಿದೆ.
ಇನ್ನು ರಾಜ್ಯದಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರು ಮತ್ತು ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರವಾದ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗೆ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು.
ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 PHC ಗಳನ್ನು CHC ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ CHC ಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ʻಆಶಾಕಿರಣʼ (Ashakirana) ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.
ಅದಲ್ಲದೆ ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ (Hand Held X-ray) ಉಪಕರಣವನ್ನು ಒದಗಿಸಲಾಗುವುದು. ಪ್ರತಿ X-ray ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸಲಾಗುವುದು
ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್ ಮತ್ತು ಆರು ಎಂ.ಆರ್.ಐ ಸ್ಕ್ಯಾನಿಂಗ್ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು.
ರಾಜ್ಯವು ಈಗಾಗಲೇ ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವಂತೆ ಆರೋಗ್ಯ ತಂತ್ರಜ್ಞಾನದ ಆವಿಷ್ಕಾರಗಳ ಅಳವಡಿಕೆಯಲ್ಲಿಯೂ ಪ್ರಮುಖ ಕೇಂದ್ರವಾಗುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು.
ರಾಜ್ಯದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲಾ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು (Karnataka Digital Health Society) ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಇದನ್ನು ಓದಿ: Karnataka Budget 2023: 1 ರಿಂದ 10 ನೇ ತರಗತಿಯವರೆಗೂ ವಿಸ್ತರಿಸಿದ ಕೋಳಿ ಮೊಟ್ಟೆ, ಚಿಕ್ಕಿ, ಬಾಳೆ ಹಣ್ಣು!
