Karnataka budget: ಇಡೀ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಪಿಎಂಸಿ(APMC) ತಿದ್ದುಪಡಿ ಕಾಯ್ದೆಯನ್ನು ಕೊನೆಗೂ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.
ಹೌದು, ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು(Siddaramaiah) 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ(Karnataka Budget ). ಇದು ಅವರ 14ನೇ ಬಜೆಟ್ ಆಗಿದ್ದು ರೈತ ವಿರೋಧಿ ಕಾಯಿದೆ ಎಪಿಎಂಸಿ ಕಾಯಿದೆ ವಾಪಸ್ಸು ಪಡೆಯುವುದಾಗಿ ಘೋಷಿಸಿದ್ದಾರೆ(APMC Amendment Act). ಸಿಎಂ ಘೋಷಣೆ ಮಾಡ್ತಿದ್ದಂತೆ ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
APMC ಕಾಯ್ದೆ ವಾಪಸ್ಸು ಪಡೆದುಕೊಳ್ಳಲಾಗುವುದು ಎಂದು ಘೋಷಿಸಿದ ಅವರು, ಇದರಿಂದ ರೈತರಿಗೆ ನೆರವಾಗಲಿದೆ. ಕೇಂದ್ರ ಸರ್ಕಾರ(Central Government) ಜಾರಿಗೆ ತಂದಿರುವ ಈ ಕಾಯ್ದೆ ರೈತರಿಗೆ ಮೋಸ ಮಾಡಲಿದೆ. ಹಿಂದಿನ ಸರ್ಕಾರವು ಎ.ಪಿ.ಎಂ.ಸಿ. ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸದೃಢ ಮಾರುಕಟ್ಟೆ ಜಾಲವನ್ನು ದುರ್ಬಲಗೊಳಿಸಿ ಎ.ಪಿ.ಎಂ.ಸಿ ಗಳ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ರೈತರ ಬದುಕಿನ ಅನಿಶ್ಚಿತತೆಗೆ ಕಾರಣವಾಗಿದೆ.
ಅಲ್ಲದೆ ‘ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯ ಮೊದಲು, 2018-19 ರಲ್ಲಿ ರಾಜ್ಯದ 167 ಕೃಷಿ ಉತ್ಪನ್ನ ಮಾರುಕಟ್ಟೆಗಳ ಒಟ್ಟು ಆದಾಯ 570 ರಿಂದ 600 ಕೋಟಿ ರೂ. ಗಳಷ್ಟಿದ್ದು, 2022-23 ರಲ್ಲಿ ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿಯ ನಂತರ ಕೇವಲ 193 ಕೋಟಿ ರೂ.ಗಳಿಗೆ ಕುಸಿದಿದೆ. ಅಲ್ಲದೆ, ಮುಕ್ತ ಮಾರುಕಟ್ಟೆಯಲ್ಲಿ ಖಾಸಗಿ ಸಂಸ್ಥೆಗಳು ರೈತರನ್ನು ವಂಚಿಸಿದ, ಶೋಷಣೆಗೆ ಒಳಪಡಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದಿವೆ. ಈ ಅವ್ಯವಸ್ಥೆಯನ್ನು ಸರಿಪಡಿಸಿ ರೈತರ ಹಿತರಕ್ಷಣೆ ಮಾಡಲು ನಮ್ಮ ಸರ್ಕಾರವು ಸದರಿ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ’ ಎಂದು ಗುಡುಗಿದರು.
ಅಂದಹಾಗೆ ಕೇಂದ್ರ ಸರ್ಕಾರದ ಸಲಹೆಯಂತೆ ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಎಪಿಎಂಸಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆಗೆ ಭಾರಿ ವಿರೋಧಗಳು ವ್ಯಕ್ತವಾಗಿದ್ದವು. ರೈತರು ಹೋರಾಟಕ್ಕಿಳಿದಿದ್ದರು. ಸದ್ಯ ರೈತರ ಹಿತದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲಾಗುತ್ತೆ. APMC ತಿದ್ದುಪಡಿ ಕಾಯ್ದೆ ಹಿಂಪಡೆಯಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಸಿಎಂ ಘೋಷಿಸಿದ್ದಾರೆ.
