Murder: ಬೆಂಗಳೂರಿನ ಅಮೃತಹಳ್ಳಿಯಲ್ಲಿ ಟೆಕ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (MD) ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಕೊಲೆಗೆ (Murder) ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ವಿನುಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಫಣಿಂದ್ರ ಸುಬ್ರಹ್ಮಣ್ಯ ಅವರನ್ನು ತಲ್ವಾರ್ ನಿಂದ ಕೊಚ್ಚಿ, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.
ಈ ಕೊಲೆ ಕುರಿತು ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಗಳು ಈ ಇಬ್ಬರು ಮುಖ್ಯಸ್ಥರ ಜೊತೆ ವೈಷಮ್ಯ ಬೆಳೆಸಿಕೊಂಡಿದ್ದರು. ಈ ಹಿಂದೆ ಇವರ ಕಂಪೆನಿಯಲ್ಲಿಯೇ ಕೆಲಸ ಮಾಡುತ್ತಿದ್ದರು. ನಂತರ ಕೆಲಸಕ್ಕೆ ರಾಜೀನಾಮೆ ನೀಡಿ ತಮ್ಮದೇ ಸ್ವಂತ ಕಂಪೆನಿ ಆರಂಭಿಸಿದ್ದರು. ಆದರೆ ತಮ್ಮ ಹಿಂದಿನ ಕಂಪೆನಿಯ ನೌಕರರು ಮತ್ತು ಗ್ರಾಹಕರನ್ನು ರಹಸ್ಯವಾಗಿ ಭೇಟಿಯಾಗಿ ಆಗುಹೋಗುಗಳ ಮಾಹಿತಿ ಸಂಗ್ರಹಿಸುತ್ತಿದ್ದರು.
ಸದ್ಯ ಪ್ರಕರಣ ನಡೆದು ರಾತ್ರಿ ಕಳೆದು ಬೆಳಗಾಗುವುದರೊಳಗೆ ಬೆಂಗಳೂರು ಈಶಾನ್ಯ ವಿಭಾಗದ ಪೊಲೀಸರು ಕಾರ್ಯಪ್ರವೃತ್ತರಾಗಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ. ಆರೋಪಿಗಳನ್ನು ಶಬರೀಶ್, ವಿನಯ್ ರೆಡ್ಡಿ ಮತ್ತು ಸಂತೋಷ್ ಎಂದು ಗುರುತಿಸಲಾಗಿದೆ.
